ರಾಧಾಮೋಹನ್ ದಾಸ್ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹಗಿಂತಲೂ ಉತ್ತಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ನವರು ಮಹಾರಾಜ ಹಾಗೂ ಸಾಮಾನ್ಯ ಅಭ್ಯರ್ಥಿ ನಡುವಿ‌ನ ಚುನಾವಣೆ ಎನ್ನುತ್ತಿರುವ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು ಮೈಸೂರಿನ ಆಳರಸರು ಅಪಾರ ಕೊಡುಗೆ ನೀಡಿದ್ದಾರೆ. ಅವರ ದೂರದೃಷ್ಟಿಯ ಫಲವಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಇದೆಲ್ಲವನ್ನೂ ಪರಿಗಣಿಸಿ ರಾಜಮನೆತನದ ಯದುವೀರ್‌ಗೆ ಬಿಜೆಪಿ ಟಿಕೆಟ್ ‌ನೀಡಿದ್ದೇವೆ.

ನಮ್ಮ ಅಭ್ಯರ್ಥಿ ಕೂಡ ಜನಸಾಮಾನ್ಯ. ನಮ್ಮ ಅಭ್ಯರ್ಥಿ ಜನಸಾಮಾನ್ಯರ ಜೊತೆಯೇ ಇದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಹಾರಾಜರು. ಆ ಮಹಾರಾಜರ ವಿರುದ್ಧ ನಮ್ಮ ಸಾಮಾನ್ಯ ಅಭ್ಯರ್ಥಿ ಹೋರಾಡುತ್ತಿದ್ದಾರೆ ಎಂದು ಹೇಳಿದರು.

ಯದುವೀರ್ ನಮ್ಮ ಸ್ಟಾರ್ ಕ್ಯಾಂಪೇನರ್. ಅವರನ್ನು ಎಲ್ಲಾ ಕಡೆಗಳಲ್ಲಿ ಪ್ರಚಾರಕ್ಕೆ ಬಳಸಿಕೊಳ್ಳುತ್ತೇವೆ. ಪ್ರತಾಪ್ ಸಿಂಹ ಕೂಡ ನಮ್ಮ ಸ್ಟಾರ್ ಪ್ರಚಾರಕ. ಅದಕ್ಕಿಂತಲೂ ಅವರ ಬಗ್ಗೆ ಇನ್ನೇನೂ ಹೇಳಬೇಕು. ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ನಿರ್ಧಿಷ್ಟವಾದ ಕಾರಣ ಏನೂ ಇಲ್ಲ ಎಂದು ತಿಳಿಸಿದರು

ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರ ಮಾಡುವ ವಿಚಾರದಲ್ಲಿ ಜೆಡಿಎಸ್ ನಾಯಕರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಸೀಟು ಹಂಚಿಕೆ ಅಂತಿಮವಾಗದ ಕಾರಣ ಅವರನ್ನು ಆಹ್ವಾನಿಸಿರಲಿಲ್ಲ. ಇದೀಗ ಸೀಟು ಹಂಚಿಕೆ ಅಂತಿಮಗೊಂಡಿದೆ. ಮುಂದೆ ನಡೆಯುವ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ಜೆಡಿಎಸ್‌ನ ಪ್ರಮುಖ ನಾಯಕರು‌ ಒಟ್ಟಿಗೆ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

Font Awesome Icons

Leave a Reply

Your email address will not be published. Required fields are marked *