ನವದೆಹಲಿ: ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ವಿಪಕ್ಷಗಳು, ಕಾಂಗ್ರೆಸ್ ಗೆ ಇರುವ ಸಂಶಯ ಇನ್ನು ಬಗೆಹರಿದಂತಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಈ ಕುರಿತು ಮತ್ತೊಮ್ಮೆ ಸಂಶಯ ವ್ಯಕ್ತಪಡಿಸಿ ಮಾತನಾಡಿದ್ದಾರೆ. ಇವಿಎಂ ದೋಷಗಳನ್ನು ಸರಿಪಡಿಸದಿದ್ದರೆ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು. ಈ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಪಕ್ಷದ ನಾಯಕ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
ಇವಿಎಂಗಳ ಮೂಲಕ ಚಲಾವಣೆಯಾದ ಶೇಕಡಾ 100ರಷ್ಟು ಮತಗಳಿಗೆ ವಿವಿಪ್ಯಾಟ್ ವ್ಯವಸ್ಥೆ ಮಾಡಬೇಕು ಎಂದು ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸುತ್ತಿದ್ದಾರೆ. ಅಷ್ಟೇ ಅಲ್ಲ ಈ ವಿವಿಪ್ಯಾಟ್ ಚೀಟಿಗಳನ್ನು ಬಾಕ್ಸ್ ನಲ್ಲಿ ಇಡದೇ ಮತದಾರರಿಗೆ ನೀಡಬೇಕು. ಇನ್ನು ರಾಮ ಮಂದಿರದ ಬಗ್ಗೆ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸ್ಯಾಮ್ ಪಿತ್ರೋಡಾ ಸಂದರ್ಶನದಲ್ಲಿ ಹೇಳಿದ್ದಾರೆ.
ಆದರೆ ಧರ್ಮವು ವೈಯಕ್ತಿಕ ವಿಷಯವಾಗಿದ್ದು, ಅದನ್ನು ರಾಜಕೀಯದೊಂದಿಗೆ ಬೆರೆಸಬಾರದು ಎಂದು ಹೇಳಿದರು. ಇಡೀ ದೇಶದಲ್ಲಿ ರಾಮಮಂದಿರದ ಬಗ್ಗೆ ಮಾತ್ರ ಚರ್ಚೆಯಾಗುತ್ತಿರುವುದಕ್ಕೆ ಬೇಸರವಾಗಿದೆ ಎಂದರು.