ಔರಾದ್ : ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಸಂಸದ ಆಗುವದು ಗ್ಯಾರಂಟಿ ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಮೇ. ೭ ರಂದು ನಡೆಯಲಿರುವ ಚುನಾವಣೆಯಲ್ಲಿ ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ಹಾಗೂ ಕ್ಷೇತ್ರದ ಮತದಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಕುಟುಂಬ ಸಮೇತವಾಗಿ ಬಂದು ಮತದಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಔರಾದ್, ಕಮಲನಗರ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹುಮ್ಮಸ್ಸಿನಿಂದ ಹಗಲು ರಾತ್ರಿ ಎನ್ನದೇ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಗ್ಯಾರಂಟಿ ಕಾರ್ಡ್ ನೀಡಿ ಮತದಾರರಿಗೆ ಮನವರಿಕೆ ಮಾಡಿದ್ದಾರೆ.
ಅಲ್ಲದೇ ಈಗಾಗಲೇ ಜಿಲ್ಲೆಯಲ್ಲಿ ಬಿಜೆಪಿಗೆ ಮತದಾರರು ತಿರಸ್ಕಾರ ಮಾಡಲು ತಿರ್ಮಾನ ಮಾಡಿದ್ದಾರೆ. ಬಿಜೆಪಿ ಅಭಿವೃದ್ಧಿ ಕುರಿತು ಮಾತನಾಡುವುದಿಲ್ಲ. ಕೇವಲ ಜಾತಿ ಎಂದುಕೊಂಡು ಮತ ಪಡೆಯಲು ಹವಣಿಸುತ್ತಿದೆ ಎಂದು ಆರೋಪಿಸಿದರು. ಜಾತಿ-ಧರ್ಮದ ಹೆಸರಿನಲ್ಲಿ ಜನರನ್ನು ವಿಭಜನೆ ಮಾಡುವುದು ಬಿಜೆಪಿ ಚಾಳಿ ಎಂದು ಜಿಲ್ಲೆಯ ಜನತೆಗೆ ಗೊತ್ತಾಗಿದೆ.
ಆದ್ದರಿಂದ ಕಾಂಗ್ರೆಸ್ ಗಾಳಿ ಬೀಸಿದೆ. ಈ ಗಾಳಿಯನ್ನು ತಡೆಯಲು ಸಾಧ್ಯವಿಲ್ಲ. ಸಾಗರ ಖಂಡ್ರೆ ಗೆಲುವು ನಿಶ್ಚಿತವಾಗಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು, ಸಾಗರ ಖಂಡ್ರೆ ಅವರನ್ನು ಗೆಲ್ಲಿಸಿದರೇ ಔರಾದ್ ಅಭಿವೃದ್ಧಿಗೆ ವೇಗ ಸಿಗಲಿದೆ. ತಾಲೂಕಿನ ನೀರಿನ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಸಿಗುವ ನಿಟ್ಟಿನಲ್ಲಿ ರಾಜ್ಯ ಸರಕಾರಕ್ಕೆ ಒತ್ತಡ ಹಾಕುವ ಮೂಲಕ ಅನುದಾನ ತರಲಾಗುತ್ತದೆ.
ಇನ್ನೂ ನಿರುದ್ಯೋಗ ಸಮಸ್ಯೆ ಹೊಗಲಾಡಿಸಲು ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆ ಯೋಜನೆ ಹಾಕಿಕೊಳ್ಳಲಾಗಿದೆ. ಸಿದ್ದರಾಮಯ್ಯ ನೇತೃತ್ವ ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಐದು ಗ್ಯಾರಂಟಿ ಯೋಜನೆಗಳು ಜಾರಿಗೆ ತರುವ ಮೂಲಕ ಬಡವರಿಗೆ ನ್ಯಾಯ ಕಲ್ಪಿಸಿದೆ. ಈಗ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನೂ ೫ ನ್ಯಾಯ ಜತೆಗೆ ೨೫ ಗ್ಯಾರಂಟಿಗಳ ಭರವಸೆಯನ್ನು ನೀಡಿದೆ. ಆದ್ದರಿಂದ ಔರಾದ್ ತಾಲೂಕಿನಿಂದ ಕನಿಷ್ಟ ೩೦ ಸಾವಿರಕ್ಕೂ ಅಧಿಕ ಲೀಡ್ ಸಾಗರ ಖಂಡ್ರೆ ಅವರಿಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.