ಕಲಬುರಗಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸೋಮವಾರ ಮಧ್ಯಾಹ್ನ 2-30 ಗಂಟೆಗೆ ಸೇಡಂ ಕ್ರೀಡಾಂಗಣದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಪ್ರಿಯಾಂಕಾ ಗಾಂಧಿ ಮಾತನಾಡುವರು, ಸುಮಾರು 30,000 ಜನ ಸೇರುವ ನಿರೀಕ್ಷೆಯಿದೆ ಎಂದರು.
ಸೋಮವಾರ ಮಧ್ಯಾಹ್ನ 12 ಗಂಟೆಗೆ ಗುರುಮಿಠಕಲ್ ಪಟ್ಟಣದಲ್ಲಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಸೇಡಂ ಬಹಿರಂಗ ಸಭೆಯಲ್ಲೂ ಪಾಲ್ಗೊಳ್ಳುವರು ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆ ಈಗ ನಿರ್ಣಾಯಕ ಹಂತಕ್ಕೆ ಬಂದಿದೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಸೂಚನೆಗಳಿಗೆ. ಗ್ಯಾರಂಟಿ ಯೋಜನೆಗಳು ಪರಿಣಾಮ ಬೀರಿವೆ. ಮಹಿಳೆಯರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಸುಶಿಕ್ಷಿತರು ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ಅವರ ಕೊಡುಗೆ ಶೂನ್ಯ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ ಎಂದು ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.