ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ-ಸಿಎಂ ಸಿದ್ದರಾಮಯ್ಯ. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಬೆಂಗಳೂರು, ನವೆಂಬರ್ 6,2023(www.justkannada.in): ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ  ಎಂದು ಸಿಎಂ  ಸಿದ್ದರಾಮಯ್ಯ ಕಿಡಿಕಾರಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ‍್ಧರಾಮಯ್ಯ, ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು.

ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂಬ ಪ್ರಧಾನಿ ಮೋದಿ ಅವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದ್ದು, ಇವೆಲ್ಲವೂ ಸುಳ್ಳಿನ ಕಂತೆ ಎಂದರು.

ಬಿಜೆಪಿಯ ದಿವಾಳಿತನ .

ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ, ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದರು.

ಬರಪರಿಹಾರ ನೀಡಿಲ್ಲ :

ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಭಾಷಣದಲ್ಲಿ ಮಾಡಿರುವ ಟೀಕೆಗೆ ಪ್ರತ್ಯುತ್ತರ ನೀಡುತ್ತಾ, 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ , ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನ ಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ.  ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ ಎಂದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉಪಹಾರ ಸಭೆ :

ಮುಖ್ಯಮಂತ್ರಿಗಳು, ಶಾಸಕರೊಂದಿಗೆ ನಡೆಸಲಾದ ಉಪಹಾರ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ ಎಂದರು.

ಬರಪರಿಹಾರ ಬಿಡುಗಡೆಗೊಳಿಸಲಿ .

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು  ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ ಎಂದರು.

ಹೈಕಮಾಂಡ್ ನಿರ್ಧಾರ :

ಲೋಕಸಭೆ ಚುನಾವಣೆಗೂ ಮುಂಚೆ ಅಥವಾ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಯತ್ನಾಳ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಇಂತಹ ವಿಚಾರಗಳ ಬಗ್ಗೆ ಪಕ್ಷದ  ಹೈಕಮಾಂಡ್ ನಿರ್ಧರಿಸುತ್ತದೆ. ಇವರಿಗೆ ಮಾತನಾಡುವ ಹಕ್ಕಿಲ್ಲ. ವಿರೋಧಪಕ್ಷ ನಾಯಕರ ಆಯ್ಕೆಯನ್ನೇ ಬಿಜೆಪಿಯವರಿಗೆ ಮಾಡಲು ಸಾಧ್ಯವಾಗಿಲ್ಲ ಎಂದರು.

Key words: All – allegations – Prime Minister- political speech -false – CM Siddaramaiah.

Font Awesome Icons

Leave a Reply

Your email address will not be published. Required fields are marked *